ಕರ್ನಾಟಕ

ಹುಬ್ಬಳ್ಳಿ ಸುತ್ತಮುತ್ತ ಅಕ್ರಮ ಮಣ್ಣು ಗಣಿಗಾರಿಕೆ ಆರೋಪ: ಅಧಿಕಾರಿಗಳ ಮೌನಕ್ಕೆ ಸಾರ್ವಜನಿಕರ ಪ್ರಶ್ನೆ

ಮೂಲಕ News Desk | ಪ್ರಕಟಿಸಲಾಗಿದೆ August 14, 2026 August 14, 2026 | 11:17 AM 30 ವೀಕ್ಷಣೆಗಳು

ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ಮಾವನೂರು, ಚೆನ್ನಾಪುರ ಸೇರಿದಂತೆ ಸುತ್ತಮುತ್ತಲಿನ ಹಲವು ಗ್ರಾಮಗಳಲ್ಲಿ ಅಕ್ರಮವಾಗಿ ಮಣ್ಣು ಗಣಿಗಾರಿಕೆ ನಡೆಯುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಅನುಮತಿ ಹಾಗೂ ನಿಯಮಗಳನ್ನು ಮೀರಿ ನಡೆಯುತ್ತಿರುವ ಮಣ್ಣು ಗಣಿಗಾರಿಕೆಯಿಂದ ಕೃಷಿ ಭೂಮಿ, ಪರಿಸರ ಹಾಗೂ ಸ್ಥಳೀಯ ಭೌಗೋಳಿಕ ವ್ಯವಸ್ಥೆಯ ಮೇಲೆ ದುಷ್ಪರಿಣಾಮ ಬೀರುವ ಆತಂಕ ಸಾರ್ವಜನಿಕರಲ್ಲಿ ಮೂಡಿದೆ.


ಗ್ರಾಮಗಳ ವ್ಯಾಪ್ತಿಯಲ್ಲಿ ನಿರಂತರವಾಗಿ ಮಣ್ಣು ತೆಗೆಯಲಾಗುತ್ತಿದೆ ಎನ್ನಲಾಗುತ್ತಿದ್ದು, ಇದರಿಂದ ಭೂಮಿಯ ಸ್ವರೂಪವೇ ಬದಲಾಗುತ್ತಿರುವ ಆರೋಪಗಳು ಕೇಳಿಬರುತ್ತಿವೆ. ಕೆಲವು ಪ್ರದೇಶಗಳಲ್ಲಿ ಗಣಿಗಾರಿಕೆಯಿಂದ ದೊಡ್ಡ ಪ್ರಮಾಣದ ಗುಂಡಿಗಳು ನಿರ್ಮಾಣವಾಗಿದ್ದು, ಮಳೆಗಾಲದಲ್ಲಿ ಅವು ಅಪಾಯಕಾರಿಯಾಗುವ ಸಾಧ್ಯತೆಯೂ ಇದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.


ಅಕ್ರಮ ಮಣ್ಣು ಗಣಿಗಾರಿಕೆ ನಡೆಯುತ್ತಿದೆ ಎಂಬ ಆರೋಪಗಳ ನಡುವೆಯೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳ ಗಮನಕ್ಕೆ ಈ ವಿಚಾರ ಬಂದಿಲ್ಲವೇ? ಅಥವಾ ಮಾಹಿತಿ ಇದ್ದರೂ ಕ್ರಮ ಕೈಗೊಳ್ಳದೆ ಮೌನ ವಹಿಸಿದ್ದಾರೆಯೇ? ಎಂಬ ಪ್ರಶ್ನೆಗಳು ಇದೀಗ ಸಾರ್ವಜನಿಕ ವಲಯದಲ್ಲಿ ಜೋರಾಗಿವೆ.


ಅಕ್ರಮ ಗಣಿಗಾರಿಕೆಯಿಂದ ಸರ್ಕಾರದ ರಾಜಸ್ವಕ್ಕೂ ನಷ್ಟವಾಗುವ ಸಾಧ್ಯತೆಯಿದ್ದು, ಪರಿಸರದ ಮೇಲೆ ಬೀರುವ ಪರಿಣಾಮದ ಬಗ್ಗೆಯೂ ಗಂಭೀರವಾಗಿ ಪರಿಶೀಲನೆ ನಡೆಸಬೇಕಿದೆ. ಗ್ರಾಮೀಣ ಪ್ರದೇಶಗಳಲ್ಲಿ ನಿಯಮಬಾಹಿರವಾಗಿ ಮಣ್ಣು ಸಾಗಾಟ ನಡೆಯುತ್ತಿದ್ದರೆ, ಸಂಬಂಧಪಟ್ಟ ಇಲಾಖೆ ಸ್ಥಳ ಪರಿಶೀಲನೆ ನಡೆಸಿ ಸೂಕ್ತ ದಾಖಲೆಗಳನ್ನು ಪರಿಶೀಲಿಸುವ ಅಗತ್ಯವಿದೆ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.


ಅಕ್ರಮ ಮಣ್ಣು ಗಣಿಗಾರಿಕೆಯ ಆರೋಪಗಳ ಕುರಿತು ಜಿಲ್ಲಾಡಳಿತ ಮತ್ತು ಗಣಿ ಹಾಗೂ ಭೂ ವಿಜ್ಞಾನ ಇಲಾಖೆ ತಕ್ಷಣ ತನಿಖೆ ನಡೆಸಿ, ತಪ್ಪಿತಸ್ಥರು ಕಂಡುಬಂದಲ್ಲಿ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು ಎಂಬುದು ಸ್ಥಳೀಯರ ಒತ್ತಾಯವಾಗಿದೆ.


ಮಾವನೂರು, ಚೆನ್ನಾಪುರ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ನಡೆಯುತ್ತಿದೆ ಎನ್ನಲಾಗುತ್ತಿರುವ ಈ ಅಕ್ರಮ ಗಣಿಗಾರಿಕೆಯ ಬಗ್ಗೆ ಜಿಲ್ಲಾಡಳಿತ ಯಾವಾಗ ಎಚ್ಚೆತ್ತುಕೊಳ್ಳಲಿದೆ? ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವರೇ? ಆರೋಪಗಳಿಗೆ ತೆರೆ ಎಳೆಯಲು ಕಠಿಣ ಕ್ರಮ ಕೈಗೊಳ್ಳುವರೇ? ಎಂಬುದನ್ನು ಕಾದು ನೋಡಬೇಕಿದೆ.